Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:8-38

Help us?
Click on verse(s) to share them!
8ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
9ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
11ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
12ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
13ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
14“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
16“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
17ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
18ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.
19“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
20ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
21ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
22ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
23ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
24“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
25ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,
26ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
27ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
28ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
29ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
30ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
31ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
32ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
33ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
34ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
35ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
36ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
37ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
38ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.

Read ಅ. ಕೃ. 15ಅ. ಕೃ. 15
Compare ಅ. ಕೃ. 15:8-38ಅ. ಕೃ. 15:8-38