12ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
13ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
14ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
15ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.
16ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
17ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
18ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.
19ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.