8ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
9“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
10ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
11ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
12ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.
13ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
14ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
15ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
16ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
17ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
18ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
19ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
20ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
21ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
22ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.