16 ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
17 ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?
18 ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
19 ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.
20 ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
21 ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.
22 ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.
23 ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
24 ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?
25 ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.
26 ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.