Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 6

ಮಾರ್ಕ 6:15-53

Help us?
Click on verse(s) to share them!
15ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.
16ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.
17ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
18ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.
19ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.
20ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
21ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
22ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
23ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.
24ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.
25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.
26ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
27ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;
28ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.
29ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
30ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
31ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
32ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.
33ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
34ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
35ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;
36ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು.
37ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು
38ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.
39ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
40ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.
41ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
42ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು.
43ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.
44ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.
45ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.
46ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.
47ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.
48ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
49ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.
50ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.
51ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.
52ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು.
53ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.

Read ಮಾರ್ಕ 6ಮಾರ್ಕ 6
Compare ಮಾರ್ಕ 6:15-53ಮಾರ್ಕ 6:15-53