Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯಾಜ - ಯಾಜ 14

ಯಾಜ 14:22-57

Help us?
Click on verse(s) to share them!
22ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
23ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
24ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
25ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
26ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
27ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.
28ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
29ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
30ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ
31ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
32“ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.
33ಯೆಹೋವನು ಮೋಶೆ ಮತ್ತು ಆರೋನರಿಗೆ,
34“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
35ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
36ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
37ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
38ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
39ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
40ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
41ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
42ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
43“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
44ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
45ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
46ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
47ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
48“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
49ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
50ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,
51ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
52ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
53ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
54“ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,
55ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,
56ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
57ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.

Read ಯಾಜ 14ಯಾಜ 14
Compare ಯಾಜ 14:22-57ಯಾಜ 14:22-57