16 ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
17 ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
18 ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
19 ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
20 ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
21 ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
22 ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
23 ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
24 ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
25 ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
26 ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
27 ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.