1 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
2 ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
3 ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
4 ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
5 ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
6 ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
7 ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8 ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
9 ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
10 ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
11 ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
12 ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13 ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.
14 ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
15 ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ,ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
16 ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
18 “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
19 ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.