2ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.
3ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)
5ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.
6ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
7ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.
8ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು.
9ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,
10ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,
11ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು.
12ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.
14ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ;ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
15ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.
16ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
17ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.