11ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
12ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
13ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
14ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
15ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.
16ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.
17ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.